ಗೋಕಾಕ್- 2028 ರಲ್ಲಿ ರಾಜ್ಯದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ಸಂಜೆ ಇಲ್ಲಿನ ಹೊರ ವಲಯದ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಬಿಜೆಪಿ ಮಂಡಲವು ಹಮ್ಮಿಕೊಂಡ ಪಂ. ದೀನ ದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜನರ ಆಶೀರ್ವಾದದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದು ಸರ್ಕಾರ ರಚಿಸಲಿದೆ ಎಂದು ಹೇಳಿದರು.

ಶ್ಯಾಂ ಪ್ರಸಾದ ಮುಖರ್ಜಿ ಮತ್ತು ದೀನ ದಯಾಳ ಉಪಾಧ್ಯಾಯ ಅವರು ಹುಟ್ಟು ಹಾಕಿದ್ದ ಜನಸಂಘವು ಮುಂದೆ ಭಾರತೀಯ ಜನತಾ ಪಾರ್ಟಿಯಾಗಿ ಬದಲಾಯಿತು. ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಡಾ. ಮುರಳಿ ಮನೋಹರ ಜೋಷಿ ಅವರು 80 ರ ದಶಕದಲ್ಲಿ ಪಕ್ಷವನ್ನು ಮುನ್ನೆಡೆಸಿದರು.
ಆರಂಭದಲ್ಲಿ ಕೇವಲ ಇಬ್ಬರು ಸಂಸತ್ ಸದಸ್ಯರನ್ನು ಹೊಂದಿದ್ದ ಪಕ್ಷವು ಹೊರಡಿಸಿದ್ದ ಚುನಾವಣಾ ಪ್ರಣಾಳಿಕೆ ಬಗ್ಗೆ ವಿರೋಧಿಗಳು ವ್ಯಂಗ್ಯಭರೀತ ಮಾತುಗಳನ್ನಾಡುತ್ತಿದ್ದರು. ಆದರೆ, ಕಾಲ ಕ್ರಮೇಣ ಇಡೀ ದೇಶದ ಮೂಲೆ- ಮೂಲೆಗಳಲ್ಲಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ರಾಷ್ಟ್ರವ್ಯಾಪಿ ಬಲವರ್ಧನೆಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರ ಕೊಡುಗೆ ಅಪಾರವಿದೆ.
2014 ರಲ್ಲಿ ಭಾರತದ ಪ್ರಧಾನ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಮೋದಿಯವರು ಮೂರನೇ ಅವಧಿಗೆ ದೇಶವನ್ನು ಮುನ್ನಡೆಸುವ ಅವಕಾಶ ಪ್ರಾಪ್ತಿಯಾಯಿತು. ದೇಶದ ಕೋಟ್ಯಾಂತರ ಕಾರ್ಯಕರ್ತರ ತ್ಯಾಗ, ಶ್ರಮದ ಫಲವಾಗಿ ಅಧಿಕಾರಕ್ಕೆ ಬಂದಿರುವ ನಮ್ಮ ಪಕ್ಷವು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ’ ಎಂಬ ಧ್ಯೇಯದೊಂದಿಗೆ ಎಲ್ಲ ವರ್ಗಗಳ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಧಾನಿಯವರ ದೂರದೃಷ್ಟಿಯಿಂದ ನಮ್ಮ ಭಾರತವನ್ನು ಜಾಗತಿಕ ಮಟ್ಟದಲ್ಲಿ ಕೊಂಡ್ಯೊಯ್ಯುವ ಕೆಲಸವನ್ನು ಪ್ರಧಾನಿಗಳು ಅತ್ಯಂತ ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ. ದೇಶದ ಮೂಲೆ- ಮೂಲೆಗಳಲ್ಲೂ ಕಮಲದ ಬಾವುಟ ಹಾರಾಡುತ್ತಿದೆ. ಮೋದಿಯವರ ಸೇವೆಯು ನಮ್ಮ ದೇಶಕ್ಕೆ ಇನ್ನೂ ಬೇಕಾಗಿದೆ ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರದ ಅವಧಿಯಲ್ಲಿ ನಡೆದಿರುವ ಅನೇಕ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಕೆಲಸ ಕಾರ್ಯಕರ್ತರದ್ದಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕಿದ್ದ ಸಂದರ್ಭದಲ್ಲಿ ಜಾರಿಗೊಂಡ ಹಲವು ಮಹತ್ತರ ಜನೋಪಯೋಗಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿ ಹೇಳುವ ಕೆಲಸವಾಗಬೇಕಿದೆ. ಮುಂಬರುವ ಗ್ರಾ.ಪಂ, ತಾ.ಪಂ, ಜಿ.ಪಂ. ಚುನಾವಣೆಗಳಲ್ಲಿ ಬಿಜೆಪಿ (ಬೆಂಬಲಿತ)
ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಕಳಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕೋರಿದರು. ಬಿಜೆಪಿ ಜತೆ ಜೆಡಿಎಸ್ ಪಕ್ಷವು ಮೈತ್ರಿಗೊಂಡಿದ್ದರಿಂದ ನಮ್ಮ ಪಕ್ಷಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲವಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು.
ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.
ಬೆಳಗಾವಿ ವಿಭಾಗೀಯ ಪ್ರಭಾರಿ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಬಿ’ ಪಾಟೀಲ, ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಅರಭಾವಿ ಬಿಎಲ್ಎ- 1 ಪ್ರಭಾರಿ ಗೋವಿಂದ ಕೊಪ್ಪದ, ನಿತೀನ ಚೌಗುಲೆ, ವೀರಭದ್ರಯ್ಯ ಪೂಜೇರಿ, ಪರಸಪ್ಪ ಬಬಲಿ, ಪ್ರಮೋದ. ನುಗ್ಗಾನಟ್ಟಿ ಅವರು ವೇದಿಕೆಯಲ್ಲಿದ್ದರು.
CKNEWSKANNADA / BRASTACHARDARSHAN CK NEWS KANNADA