ಬೆಂಗಳೂರು, ಜು.10- ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಈ ಬಾರಿ ಬೇಸಿಗೆ ಅಂದರೆ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿತ್ತು. ಮುಂಗಾರು ಪ್ರವೇಶದ ನಂತರ ಮೊದಲ ಒಂದೆರಡು ವಾರಗಳನ್ನು ಹೊರತುಪಡಿಸಿದರೆ ಎಲ್ಲೆಡೆ ಮಳೆ ಕಡಿವಯಾಗಿತ್ತು.
ಆದರೆ, ಇದೀಗ ಮಳೆ ಬರಲು ಆರಂಭಿಸಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಜು.15ರ ವರೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಸಹಾಯವಾಣಿ ಪ್ರಾಂರಂಭಿಸಿದೆ.
ಪ್ರವಾಹ ಸಂದರ್ಭ ಎದುರಾದರೆ ಸಹಾಯವಾಣಿ ಕೇಂದ್ರಗಳ 7411896431, 7411896432 ಹಾಗೂ 7411896433 ಸಂಖ್ಯೆಗಳಿಗೆ ಕರೆ ಮಾಡಲು ಜಿಲ್ಲಾಡಳಿತ ತಿಳಿಸಿದೆ. ಭೀಮಾ ಕಾಗಿನ ನದಿಪಾತ್ರದಲ್ಲಿರುವ ಜನರು ದೂರವಿರುವಂತೆ ಸೂಚನೆ ನೀಡಲಾಗಿದೆ.
CKNEWSKANNADA / BRASTACHARDARSHAN CK NEWS KANNADA